
ಇಂಡೋನೇಷ್ಯಾದಲ್ಲಿ ರೋಬೋಟ್ ತಂತ್ರಜ್ಞಾನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಪೂಜ್ಯರಿಂದ ಅಭಿನಂದನೆ.
ಬೆಳಗಾವಿ ಮೇ 25: ಭಾರತ ದೇಶವನ್ನು ಪ್ರತಿನಿಧಿಸಿ ಇಂಡೋನೇಷ್ಯಾ ದೇಶದಲ್ಲಿ ನಡೆದ ಅಂತರರಾಷ್ಟ್ರೀಯ ರೋಬೋಟ್ ತಂತ್ರಜ್ಞಾನ ಕ್ರೀಡಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ದೇಶದ ಕೀರ್ತಿ ಪತಾಕೆಯನ್ನು ಜಗತ್ತಿನ ವೇದಿಕೆಯಲ್ಲಿ ಹಾರಿಸಿದ ನಾಗನೂರು ರುದ್ರಾಕ್ಷಿಮಠದ ಶ್ರೀ ಸಿದ್ಧರಾಮೇಶ್ವರ ಶಿಕ್ಷಣ ಸಂಸ್ಥೆಯ ಪ್ರತಿಭಾವಂತ ವಿದ್ಯಾರ್ಥಿಗಳಾದ ಕು. ವಿಠ್ಠಲ ಗದಗ ಹಾಗೂ ಕು. ಸುಶಾಂತ ಬಂಡಿವಡ್ಡರ ಅವರಿಗೆ ಹುಕ್ಕೇರಿ ಹಿರೇಮಠ ಸಂಸ್ಥಾನದ ಪೂಜ್ಯ ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ಆತ್ಮೀಯವಾಗಿ ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು.
ಹುಕ್ಕೇರಿ ಹಿರೇಮಠ ಸಂಸ್ಥಾನದಲ್ಲಿ ನಡೆದ ಸರಳ ಹಾಗೂ ಅರ್ಥಪೂರ್ಣ ಸಮಾರಂಭದಲ್ಲಿ ವಿದ್ಯಾರ್ಥಿಗಳನ್ನು ಶಾಲು ಹೊದಿಸಿ, ಪುಷ್ಪಾರ್ಚನೆ ಮಾಡಿ ಗೌರವಿಸಲಾಯಿತು. ಈ ವೇಳೆ ಮಾತನಾಡಿದ ಪೂಜ್ಯ ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು, “ಇಂದಿನ ವಿದ್ಯಾರ್ಥಿಗಳು ಕೇವಲ ಪಠ್ಯ ಅಧ್ಯಯನಕ್ಕೆ ಸೀಮಿತವಾಗದೆ ವಿಜ್ಞಾನ, ತಂತ್ರಜ್ಞಾನ ಹಾಗೂ ನವೋದ್ಯಮ ಕ್ಷೇತ್ರಗಳಲ್ಲಿಯೂ ಅಸಾಧಾರಣ ಸಾಧನೆ ಮಾಡುತ್ತಿರುವುದು ಹೆಮ್ಮೆಯ ಸಂಗತಿ. ವಿದೇಶಿ ನೆಲದಲ್ಲಿ ಭಾರತದ ಪ್ರತಿಷ್ಠೆಯನ್ನು ಎತ್ತಿಹಿಡಿದಿರುವ ಈ ವಿದ್ಯಾರ್ಥಿಗಳು ನಮ್ಮ ರಾಜ್ಯ ಮತ್ತು ದೇಶಕ್ಕೆ ಹೆಮ್ಮೆ ತಂದಿದ್ದಾರೆ” ಎಂದು ಶ್ಲಾಘಿಸಿದರು.
ಅವರು ಮುಂದುವರಿದು, “ರೋಬೋಟ್ ತಂತ್ರಜ್ಞಾನ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಈ ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ. ತಮ್ಮ ಪ್ರತಿಭೆ, ಪರಿಶ್ರಮ ಮತ್ತು ಆತ್ಮವಿಶ್ವಾಸದಿಂದ ಜಗತ್ತಿನ ಮಟ್ಟದಲ್ಲಿ ಭಾರತವನ್ನು ಮತ್ತಷ್ಟು ಉಜ್ವಲಗೊಳಿಸಲಿ. ಇವರ ಸಾಧನೆ ಇತರ ವಿದ್ಯಾರ್ಥಿಗಳಿಗೂ ಪ್ರೇರಣೆಯಾಗಲಿ” ಎಂದು ಆಶೀರ್ವದಿಸಿದರು.
ಅಂತರರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿರುವುದು ಸಂಸ್ಥೆಯ ಶಿಕ್ಷಕರು, ಪೋಷಕರು ಹಾಗೂ ಶಿಕ್ಷಣ ಸಂಸ್ಥೆಗೆ ಹೆಮ್ಮೆ ತಂದಿದ್ದು, ಈ ಸಾಧನೆಗೆ ಶ್ರಮಿಸಿದ ಎಲ್ಲರನ್ನೂ ಈ ಸಂದರ್ಭದಲ್ಲಿ ಸ್ಮರಿಸಲಾಯಿತು. ವಿದ್ಯಾರ್ಥಿಗಳ ಸಾಧನೆಗೆ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಹಾಗೂ ಸಾರ್ವಜನಿಕ ವಲಯದಿಂದಲೂ ಮೆಚ್ಚುಗೆ ವ್ಯಕ್ತವಾಯಿತು.
ಸಮಾರಂಭದಲ್ಲಿ. ಶ್ರೀ ಮಹಾಂತೇಶ ವಕ್ಕುಂದ. ಬೆಳಗಾವಿ ಮಹಾನಗರ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರು. ಮತ್ತು ಸಮಾಜಸೇವಕರು. ಶಾಲಾ-ಕಾಲೇಜುಗಳ ಅನುದಾನಿತ ನೌಕರರ ಸಂಘದ ಅಧ್ಯಕ್ಷ ಬಸವರಾಜ ಹಳಿಂಗಳಿ, ಶ್ರೀ ದಯಾನಂದ ಮಗದುಮ್ಮ, ಮಹಾಂತೇಶ್ ಅವರ ತಾಯಿ ನೀಲವ್ವ ಅಡಿವೆಪ್ಪ ವಕುಂದ, ಶ್ರೀ ಅಪ್ಪಯ್ಯ ಮಠ, ಶ್ರೀ ಕಿರಣ್ ಅಷ್ಟಗಿ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.